(ರಾಗ – ಸೌರಾಷ್ಟ್ರ, ಆದಿತಾಳ)
ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣ
ಅಖಿಲಗುಣ ಸದ್ಧಾಮ ಮಧ್ವನಾಮ ॥ ಪ ॥
ಆವ ಕಚ್ಛಪ ರೂಪದಿಂದಲಂಡೋದಕವ
ಓವಿ ಧರಿಸಿದ ಶೇಷಮೂರುತಿಯನು
ಆವವನ ಬಳಿವಿಡಿದು ಹರಿಯ ಸುರರೈಯ್ದುವರು
ಆ ವಾಯು ನಮ್ಮ ಕುಲಗುರುರಾಯನು ॥ 1 ॥
ಆವವನು ದೇಹದೊಳಗಿರಲು ಹರಿ ನೆಲಸಿಹನು
ಆವವನು ತೊಲಗೆ ಹರಿ ತಾ ತೊಲಗುವ
ಆವವನು ದೇಹದಾ ಒಳ ಹೊರಗೆ ನಿಯಾಮಕನು
ಆ ವಾಯು ನಮ್ಮ ಕುಲಗುರುರಾಯನು ॥ 2 ॥
ಕರುಣಾಭಿಮಾನಿ ಸುರರು ದೇಹವ ಬಿಡಲು
ಕುರುಡ ಕಿವುಡ ಮೂಕನೆಂದೆನಿಸುವ
ಪರಮ ಮುಖ್ಯ ಪ್ರಾಣ ತೊಲಗಲಾ ದೇಹವನು
ಅರಿತು ಪೆಣನೆಂದು ಪೇಳುವರು ಬುಧಜನ ॥ 3 ॥
ಸುರರೊಳಗೆ ನರರೊಳಗೆ ಸರ್ವಭೂತಗಳೊಳಗೆ
ಪರತರನೆನಿಸಿ ನಿಯಾಮಿಸಿ ನೆಲಸಿಹ
ಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳು
ಗುರುಕುಲತಿಲಕ ಮುಖ್ಯ ಪವಮಾನನು ॥ 4 ॥
ತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದು
ವಾತಸುತ ಹನುಮಂತನೆಂದೆನಿಸಿದ
ಪೋತ ಭಾವದಿ ತರಣಿ ಬಿಂಬಕ್ಕೆ ಲಂಘಿಸಿದ
ಈತಗೆಣೆಯಾರು ಮೂಲೋಕದೊಳಗೆ ॥ 5 ॥
ತರಣಿಗಭಿಮುಖನಾಗಿ ಶಬ್ದಶಾಸ್ತ್ರವ ಪಠಿಸಿ
ಉರವಣಿಸಿ ಹಿಂದುಮುಂದಾಗಿ ನಡೆದ
ಪರಮ ಪವಮಾನ ಸುತ ಉದಯಾಸ್ತ ಶೈಲಗಳ
ಭರದಿಯೈದಿದಗೀತಗುಪಮೆ ಉಂಟೇ ॥ 6 ॥
ಅಖಿಲ ವೇದಗಳ ಸಾರ ಪಠಿಸಿದನು ಮುನ್ನಲ್ಲಿ
ನಿಖಿಳ ವ್ಯಾಕರಣಗಳ ಇವ ಪೇಳಿದ
ಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದು
ಮುಖ್ಯಪ್ರಾಣನನು ರಾಮನನುಕರಿಸಿದ ॥ 7 ॥
ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿ
ಧರಣಿಸುತೆಯಳ ಕಂಡು ಧನುಜರೊಡನೆ
ಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳ
ಉರುಹಿ ಲಂಕೆಯ ಬಂದ ಹನುಮಂತನು ॥ 8 ॥
ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿ
ಶರಧಿಯನು ಕಟ್ಟಿ ಬಲು ರಕ್ಕಸರನು
ಒರಸಿ ರಣದಲಿ ದಶಶಿರನ ಹುಡಿಗುಟ್ಟಿದ
ಮೆರೆದ ಹನುಮಂತ ಬಲವಂತ ಧೀರ ॥ 9 ॥
ಉರಗಬಂಧಕೆ ಸಿಲುಕಿ ಕಪಿವರರು ಮೈಮರೆಯೆ
ತರಣಿಕುಲತಿಲಕನಾಜ್ಞೆಯ ತಾಳಿದ
ಗಿರಿಸಹಿತ ಸಂಜೀವನವ ಕಿತ್ತು ತಂದಿತ್ತ
ಹರಿವರಗೆ ಸರಿಯುಂಟೆ ಹನುಮಂತಗೆ ॥ 10 ॥
ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆ
ಭಜಿಸಿ ಮೌಕ್ತಿಕದ ಹಾರವನು ಪಡೆದ
ಅಜಪದವಿಯನು ರಾಮ ಕೊಡೆವೆನೆನೆ ಹನುಮಂತ
ನಿಜ ಭಕುತಿಯನೆ ಬೇಡಿ ವರವ ಪಡೆದ ॥ 11 ॥
ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ
ಸೋಮಕುಲದಲಿ ಜನಿಸಿ ಪಾರ್ಥನೊಡನೆ
ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದ
ಆ ಮಹಿಮ ನಮ್ಮ ಕುಲಗುರುರಾಯನು ॥ 12 ॥
ಕರದಿಂದ ಶಿಶುಭಾವನಾದ ಭೀಮನ ಬಿಡಲು
ಗಿರವಡಿದು ಶತಶೃಂಗವೆಂದೆನಿತು
ಹರಿಗಳ ಹರಿಗಳಿಂ ಕರಿಗಳ ಕರಿಗಳಿಂ
ಅರೆವ ವೀರರಿಗೆ ಸುರ ನರರು ಸರಿಯೇ ॥ 13 ॥
ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿ
ಹಸಿದುರಗಗಳ ಮ್ಯಾಲೆ ಬಿಡಲದನೊರಸಿದ
ಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರ
ಧರಿಸಿ ಜಾಹ್ನವಿಗೊಯ್ದ ತನ್ನನುಜರ ॥ 14 ॥
ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರ
ನಿಲ್ಲದೊರಸಿದ ಲೋಕಕಂಟಕರನು
ಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದು
ಎಲ್ಲ ಸುಜನರಿಗೆ ಹರುಷವ ತೋರಿದ ॥ 15 ॥
ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿ
ರಾಜಸೂಯಾಗವನು ಮಾಡಿಸಿದನು
ಆಜಿಯೊಳು ಕೌರವರ ಬಲವ ಸವರುವೆನೆಂದು
ಮೂಜಗವರಿಯೆ ಕಂಕಣ ಕಟ್ಟಿದ ॥ 16 ॥
ದಾನವರ ಸವರಬೇಕೆಂದು ಬ್ಯಾಗ
ಮಾನನಿಧಿ ದ್ರೌಪದಿಯ ಮನದಿಂಗಿತವನರಿತು
ಕಾನನವ ಪೊಕ್ಕು ಕಿಮ್ಮಾರಾದಿಗಳ ಮುರಿದು
ಮಾನಿನಿಗೆ ಸೌಗಂಧಿಕವನೆ ತಂದ ॥ 17 ॥
ದುರುಳ ಕೀಚಕನು ತಾ ದ್ರೌಪದಿಯ ಚೆಲುವಿಕೆಗೆ
ಮರುಳಾಗಿ ಕರಕರಿಯ ಮಾಡಲವನಾ
ಗರಡಿ ಮನೆಯಲಿ ಬರಸಿ ಅವನನ್ವಯವ
ಕುರುಪನಟ್ಟಿದ ಮಲ್ಲಕುಲವ ಸದೆದ ॥ 18 ॥
ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿ
ಓರಂತೆ ಕೌರವನ ಮುರಿದು ಮೆರೆದ
ವೈರಿ ದುಶ್ಶಾಸನ್ನ ರಣದಲ್ಲಿ ಎಡಗೆಡಹಿ
ವೀರ ನರಹರಿಯ ಲೀಲೆಯ ತೋರಿದ ॥ 19 ॥
ಗುರುಸುತನು ಸಂಗರದಿ ನಾರಾಯಣಾಸ್ತ್ರವನು
ಉರವಣಿಸಿ ಬಿಡಲು ಶಸ್ತ್ರವ ಬಿಸುಟರು
ಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಿಂ
ಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ ॥ 20 ॥
ಚಂಡ ವಿಕ್ರಮನು ಗದೆಗೊಂಡು ರಣದಿ ಭೂ
ಮಂಡಲದೊಳಿದಿರಾಂತ ಖಳರನೆಲ್ಲಾ
ಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನು
ಕಂಡು ನಿಲ್ಲುವರಾರು ತ್ರಿಭುವನದೊಳು ॥ 21 ॥
ದಾನವರು ಕಲಿಯುಗದೊಳವತರಿಸಿ ವಿಬುಧರೊಳು
ವೇನನ ಮತವನರುಹಲದನರಿತು
ಜ್ಞಾನಿ ತಾ ಪವಮಾನ ಭೂತಳದೊಳವತರಿಸಿ
ಮಾನನಿಧಿ ಮಧ್ವಾಖ್ಯನೆಂದೆನಿಸಿದ ॥ 22 ॥
ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿ
ನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದ
ಉರ್ವಿಯೊಳು ಮಾಯೆ ಬೀರಲು ತತ್ತ್ವಮಾರ್ಗವನು
ಓರ್ವ ಮಧ್ವಮುನಿ ತೋರ್ದ ಸುಜನರ್ಗೆ ॥ 23 ॥
ಸರ್ವೇಶ ಹರಿ ವಿಶ್ವ ಎಲ್ಲ ತಾ ಪುಸಿಯೆಂಬ
ದುರ್ವಾದಿಗಳ ಮತವ ನೆರೆ ಖಂಡಿಸಿ
ಸರ್ವೇಶ ಹರಿ ವಿಶ್ವ ಸತ್ಯವೆಂದರುಹಿದಾ
ಶರ್ವಾದಿ ಗೀರ್ವಾಣ ಸಂತತಿಯಲಿ ॥ 24 ॥
ಬದರಿಕಾಶ್ರಮಕೆ ಪುನರಪಿಯೈದಿ ವ್ಯಾಸಮುನಿ
ಪದಕೆರಗಿ ಅಖಿಳ ವೇದಾರ್ಥಗಳನು
ಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವ
ಯೈದಿದ ಮಧ್ವಮುನಿರಾಯಗಭಿವಂದಿಪೆ ॥ 25 ॥
ಜಯ ಜಯತು ದುರ್ವಾದಿಮತತಿಮಿರ ಮಾರ್ತಾ0ಡ
ಜಯಜಯತು ವಾದಿಗಜಪಂಚಾನನ
ಜಯಜಯತು ಚಾರ್ವಾಕಗರ್ವಪರ್ವತಕುಲಿಶ
ಜಯಜಯತು ಜಗನ್ನಾಥ ಮಧ್ವನಾಥ ॥ 26 ॥
ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿ
ಭಂಗವಿಲ್ಲದೆ ಸುಖವ ಸುಜನಕೆಲ್ಲ
ಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕ
ರಂಗವಿಠಲನೆಂದು ನೆರೆ ಸಾರಿರೈ ॥ 27 ॥
ಫಲಶ್ರುತಿ (ಜಗನ್ನಾಥದಾಸ ವಿರಚಿತ)
ಸೋಮ ಸೂರ್ಯೋಪರಾಗದಿ ಗೋಸಹಸ್ರಗಳ
ಭೂಮಿದೇವರಿಗೆ ಸುರನದಿಯ ತಟದಿ
ಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕು
ಈ ಮಧ್ವನಾಮ ಬರೆದೋದಿದರ್ಗೆ ॥ 1 ॥
ಪುತ್ರರಿಲ್ಲದವರು ಸತ್ಪುತ್ರರೈದುವರು
ಸರ್ವತ್ರದಲಿ ದಿಗ್ವಿಜಯವಹುದು ಸಕಲ
ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು
ಸೂತ್ರನಾಮಕನ ಸಂಸ್ತುತಿ ಮಾತ್ರದಿ ॥ 2 ॥
ಶ್ರೀಪಾದರಾಯ ಪೇಳಿದ ಮಧ್ವನಾಮ ಸಂ
ತಾಪಕಳೆದಖಿಲ ಸೌಖ್ಯವನೀವುದು
ಶ್ರೀಪತಿ ಜಗನ್ನಾಥವಿಠಲನ ತೋರಿ ಭವ
ಕೂಪಾರದಿಂದ ಕಡೆ ಹಾಯಿಸುವುದು ॥ 3 ॥